ಗುಂಡ್ಯದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಹೆದ್ದಾರಿಗಿಳಿದ ಪ್ರತಿಭಟನಾ ಮುಂಚೂಣಿ ನಾಯಕರ ವಿರುದ್ದ ಕೇಸು ದಾಖಲು

Kadaba Times News



ಕುಕ್ಕೆಸುಬ್ರಹ್ಮಣ್ಯ/ಗುಂಡ್ಯ:ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.15ರಂದು ಮಧ್ಯಾಹ್ನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ , ಬೈಂದೂರು ಶಾಸಕ , ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ  ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.


ಉಪ್ಪಿನಂಗಡಿ ಠಾಣಾ ಎಸ್.ಐ.ಅವಿನಾಶ್ ಅವರ ದೂರಿನಂತೆ ಈ ಕೇಸು ದಾಖಲಾಗಿದೆ. ನ.15ರಂದು ಸಿರಿಬಾಗಿಲು ಗ್ರಾಮದ ಲಕ್ಷ್ಮೀ ವೆಂಕಟೇಶ್ ದೇವಸ್ಥಾನದ ಮಾಡ ಮೈದಾನದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆದಿದ್ದು ಪ್ರತಿಭಟನಾ ಸಭೆಯಲ್ಲಿದ್ದವರು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರ ನೇತೃತ್ವದಲ್ಲಿ ಪ್ರತಿಭಟನಾ ಸಭೆಯ ಸ್ಥಳದಿಂದ ಸುಮಾರು 1 ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಪೇಟೆಗೆ ಬಂದು ಮದ್ಯಾಹ್ನ 2.30 ಗಂಟೆಗೆ ರಸ್ತೆತಡೆಯನ್ನು ಪ್ರಾರಂಭಿಸಿದ್ದರು.

 ರಸ್ತೆಯ ಮಧ್ಯದಲ್ಲಿಯೇ ಶಾಸಕರಾದ ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳೆ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಪ್ರತಿಭಟನಾಕಾರರಾದ ಸುಧೀರ್ ಶೆಟ್ಟಿ, ನವೀನ್ ನೆರಿಯಾ, ಸತೀಶ್ ಶೆಟ್ಟಿ ಬಲ್ಯ, ಉಮೇಶ್ ಸಾಯಿರಾಮ್, ವೆಂಕಟ ಒಳಲಂಬೆ, ಪ್ರಕಾಶ್ ಗುಂಡ್ಯ, ಪ್ರಸಾದ್ ನೆಟ್ಟಣ, ಸೈಯದ್ ಮೀರಾನ್ ಸಾಹೇಬ್, ಉಮೇಶ್ ಬಲ್ಯ, ನವೀನ್ ರೆಖ್ಯಾ, ಯತೀಶ್ ಗುಂಡ್ಯ, ಗಣೇಶ್ ಮತ್ತು ಇತರರು ಅಕ್ರಮಕೂಟ ಸೇರಿಕೊಂಡು ಅಕ್ರಮ ರಸ್ತೆ ತಡೆ ಮಾಡಿ ಪ್ರತಿಭಟನೆಯನ್ನು ಮಾಡಿದ್ದಾರೆ. 

ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ಮಾಡದಂತೆ ಹಾಗೂ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸದಂತೆ ತಿಳಿಸಿದರೂ ಇವರುಗಳು ಕೇಳದೆ ಪ್ರತಿಭಟನೆಯನ್ನು ಮುಂದುವರಿಸಿ ಕಸ್ತೂರಿರಂಗನ್ ವರದಿ ವಿರೋಧಿಸಿ ಸರ್ಕಾರ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿದ್ದಾರೆ. ಈ ರೀತಿ ಅಕ್ರಮ ಕೂಟ ಸೇರಿಕೊಂಡು ರಸ್ತೆ ತಡೆಮಾಡಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವುದು ಕಾನೂನು ಬಾಹಿರ ಎಂದು ತಿಳಿಸಿದರೂ ಗಣನೆಗೆ ತೆಗೆದುಕೊಳ್ಳದೆ ಮಧ್ಯಾಹ್ನ 3.30 ಗಂಟೆಯ ತನಕ ರಸ್ತೆ ತಡೆಮಾಡಿ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿರುತ್ತಾರೆ ಎಂದು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top