


ನೆಲ್ಯಾಡಿ: ಶಿರಾಡಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಡಬ ತಾಲೂಕು ಶಿರಾಡಿ ಗ್ರಾಮದ ಪದಂಬಳ ನಿವಾಸಿ ಕೃಷಿಕ ಕೆ.ಎಂ.ಮತ್ತಾಯಿ ಯಾನೆ ಮತ್ತಚ್ಚನ್ (70) ಮೃತ ವ್ಯಕ್ತಿ.
ತನ್ನ ಮನೆಯಿಂದ ಶಿರಾಡಿ ಪೇಟೆಗೆ ಪಡಿತರ ಪಡೆಯಲು ಬಂದವರು ಶಿರಾಡಿಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಧರ್ಮಸ್ಥಳದಿಂದ-ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಇವರಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಮತ್ತಾಯಿ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಎರಡನೇ ಅಘಾತ: ಕೆ.ಎಂ.ಮತ್ತಾಯಿ ಅವರ ಹಿರಿಯ ಪುತ್ರ ರೆಜಿ ಅವರು 2 ತಿಂಗಳ ಹಿಂದೆ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಉದನೆ ಸಮೀಪದ ನೇಲಡ್ಕದಲ್ಲಿ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ಈ ಅಪಘಾತದಿಂದ ನಡೆದಾಡಲು ಸಾಧ್ಯವಾಗದೆ ರೆಜಿ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದೀಗ ಮತ್ತಾಯಿ ಅವರು ಬಸ್ ಅಪಘಾತದಲ್ಲಿ ಮೃತಪಟ್ಟಿದ್ದು ಇವರ ಕುಟುಂಬಕ್ಕೆ ಮತ್ತೊಂದು ಅಘಾತವಾಗಿದೆ.