




ಕಡಬ ಟೈಮ್ಸ್, ಕ್ರೈಂ ಸುದ್ದಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಪುತ್ತೂರು ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆ ಮಾಡುವಂತೆ ಆದೇಶಿಸಿದೆ.
ಕಡಬ ಪೋಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಯುವತಿಯೊಬ್ಬಳ ಮೇಲೆ ಅದೇ ಗ್ರಾಮದ ನಂದನ್ ಎಂ.ಇ ಎಂಬಾತ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ಆತನ ವಿರುದ್ಧ ಅ. 8ರಂದು ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 376 (3), 376(2)(n), 506 IPC ಮತ್ತು POCSO ಕಾಯಿದೆಯ 6, 12ರ ಅಡಿಯಲ್ಲಿ ಮೊಕದಮ್ಮೆ ದಾಖಲಿಸಿಕೊಂಡಿದ್ದರು.
ಬಳಿಕ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿತ್ತು.ನಂತರ ಆರೋಪಿಯ ವಿರುದ್ಧ ದೋಷರೋಪಣಾ ಪಟ್ಟಿಯನ್ನು ಕೂಡಾ ದಾಖಲಿಸಲಾಗಿತ್ತು. ಈ ಹಂತದಲ್ಲಿ ಆರೋಪಿಯನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸುವಂತೆ ಜಾಮೀನು ಅರ್ಜಿಯನ್ನು ಇತ್ತೀಚೆಗೆ ಸಲ್ಲಿಸಲಾಗಿತ್ತು.
ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯ ಮೇಲೆ ವಾದ ವಿವಾದಗಳನ್ನು ಆಲಿಸಿದ ಪುತ್ತೂರಿನ ಮಾನ್ಯ ದ.ಕ ಜಿಲ್ಲಾ 5 ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ ಡಿ. ಅವರು ಆರೋಪಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಆದೇಶಿಸಿರುವುದಾಗಿ ತಿಳಿದು ಬಂದಿದೆ.