




ಕಡಬ ಟೈಮ್ಸ್, ಪ್ರಮುಖ ಸುದ್ದಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡರಾತ್ರಿ (ಜೂನ್ 15) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮೃತ ಪ್ರಯಾಣಿಕರನ್ನು ಕಾರ್ಕಳದ ಹೆರ್ಮುಂಡೆ ಗ್ರಾಮದ ಶಂಕರ ನಾರಾಯಣ ಭಟ್ (58) ಎಂದು ಗುರುತಿಸಲಾಗಿದೆ. ಅವರು ಬಸ್ನಲ್ಲಿಯೇ ಪ್ರಯಾಣಿಸುತ್ತಿದ್ದರು. ತೀವ್ರ ಗಾಯಗಳೊಂದಿಗೆ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಲಾವತ್ತಡ್ಕ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿ ಎಕ್ಸ್ಕವೇಟರ್ಗೆ ವೇಗವಾಗಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಹಲವಾರು ಪ್ರಯಾಣಿಕರು ಸಿಕ್ಕಿಹಾಕಿಕೊಂಡು ಗಾಯಗೊಂಡಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಕ್ಷಣವೇ ಪುತ್ತೂರು ಹಾಗೂ ಮಂಗಳೂರು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆದ್ದಾರಿ ಬದಿಯಲ್ಲಿ ಎಚ್ಚರಿಕೆ ಚಿಹ್ನೆಗಳಿಲ್ಲದೆ ಹಿಟಾಚಿ ನಿಲ್ಲಿಸಿದ್ದ ಬಗ್ಗೆ ಸಹ ತನಿಖೆ ನಡೆಯುತ್ತಿದೆ. ಈ ಹೆದ್ದಾರಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹಲವು ಅಪಘಾತಗಳು ನಡೆದಿದ್ದು ಸ್ಥಳೀಯರು ಈ ಅಪಘಾತಗಳ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.