



ರಾಜ್ಯಾದ್ಯಂತ ತೀವ್ರ ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಪ್ರಕರಣ ಸಂಖ್ಯೆ 39/2025 ರ ತನಿಖೆಯನ್ನು ಕರ್ನಾಟಕ ಸರ್ಕಾರವು ವಿಶೇಷ ತನಿಖಾ ತಂಡಕ್ಕೆ (SIT) ವರ್ಗಾಯಿಸಿ ಮಹತ್ವದ ಆದೇಶ ಹೊರಡಿಸಿದೆ
ದಿನಾಂಕ 19.07.2025 ರಂದು ರಾಜ್ಯ ಗೃಹ ಇಲಾಖೆಯು ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಿದ್ದು, ಪ್ರಕರಣದ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ಪರಿಗಣಿಸಿ, ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಸರ್ಕಾರ ಮನಗಂಡಿದೆ. ಈ ಹಿನ್ನೆಲೆಯಲ್ಲಿ ತನಿಖೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಸ್ಐಟಿಗೆ ವಹಿಸಲಾಗಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.
ಈ ಕೆಳಕಂಡ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ಸರ್ಕಾರವು ಆದೇಶಿಸಿದೆ.
1. ಡಾ|| ಪ್ರಣವ ಮೊಹಾಂತಿ, ಐ.ಪಿ.ಎಸ್.ಮುಖ್ಯಸ್ಥರು
ಪೊಲೀಸ್ ಮಹಾ ನಿರ್ದೇಶಕರು,
ಆಂತರಿಕ ಭದ್ರತಾ ವಿಭಾಗ, ಬೆಂಗಳೂರು.
2. ಎಂ.ಎನ್ ಅನುಚೇತ್ ಐಪಿಎಸ್ . ಉಪ ಪೊಲೀಸ್ ಮಹಾ ನಿರೀಕ್ಷಕರು, ನೇಮಕಾತಿ, ಬೆಂಗಳೂರು.
3. ಶ್ರೀಮತಿ ಸೌಮ್ಯಲತಾ, ಐ.ಪಿ.ಎಸ್. ಉಪ ಪೊಲೀಸ್ ಆಯುಕ್ತರು, ಸಿ.ಎ.ಆರ್.ಕೇಂದ್ರಸ್ಥಾನ, ಬೆಂಗಳೂರು ನಗರ.
4. ಶ್ರೀ ಜಿತೇಂದ್ರ ಕುಮಾರ್ ದಯಾಮ, ಐ.ಪಿ.ಎಸ್. ಪೊಲೀಸ್ ಅಧೀಕ್ಷಕರು, ಆಂತರಿಕ ಭದ್ರತಾ ವಿಭಾಗ, ಬೆಂಗಳೂರು.
ಮೇಲ್ಕಂಡ ಪ್ರಕರಣವೂ ಸೇರಿದಂತೆ ಹಾಗೂ ಇದರ ಸಂಬಂಧ ಕರ್ನಾಟಕ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ / ದಾಖಲಾಗುವ ಇತರೆ ಎಲ್ಲಾ ಕ್ರಿಮಿನಲ್ ಪ್ರಕರಣಗಳ ತನಿಖೆಯನ್ನು ಡಿಜಿ ಮತ್ತು ಐಜಿಪಿ ರವರು ಈ ವಿಶೇಷ ತನಿಖಾ ತಂಡ (Special Investigation Team) ವರ್ಗಾಯಿಸುವುದು ಹಾಗೂ ವಿಶೇಷ ತನಿಖಾ ತಂಡಕ್ಕೆ ಅವಶ್ಯವಿರುವ ಇತರೆ ಅಧಿಕಾರಿ /ಸಿಬ್ಬಂದಿಗಳನ್ನು ಒದಗಿಸುವುದು. ಈ ವಿಶೇಷ ತನಿಖಾ ತಂಡವು (Special Investigation Team) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದು.ವಿಶೇಷ ತನಿಖಾ ತಂಡವು ತನಿಖೆಗೆ ಸಂಬಂಧಿಸಿದ ತನಿಖಾ ಪ್ರಗತಿಯನ್ನು ಆಗಿಂದಾಗ್ಗೆ ಡಿಜಿ ಮತ್ತು ಐಜಿಪಿ ರವರಿಗೆ ವರದಿ ಮಾಡುವುದಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಿಂದ ಹಾಗೂ ವಿವಿಧ ಸಂಘಟನೆಗಳಿಂದ ಉನ್ನತ ಮಟ್ಟದ ತನಿಖೆಗೆ ಒತ್ತಾಯಗಳು ಕೇಳಿಬಂದಿದ್ದವು. ಈ ಎಲ್ಲಾ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಗೃಹ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.
ಸರ್ಕಾರದ ಆದೇಶದ ಅನ್ವಯ, ವಿಶೇಷ ತನಿಖಾ ತಂಡವು ಶೀಘ್ರದಲ್ಲೇ ತನ್ನ ಕಾರ್ಯಚಟುವಟಿಕೆಗಳನ್ನು ಆರಂಭಿಸಲಿದೆ. ಮೊದಲ ಹಂತವಾಗಿ, ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಪತ್ರಗಳು, ಪ್ರಥಮ ಮಾಹಿತಿ ವರದಿ (FIR), ಹಾಗೂ ಇದುವರೆಗಿನ ತನಿಖಾ ಪ್ರಗತಿಯ ವರದಿಯನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳಲಿದ್ದಾರೆ.